Mon. Dec 1st, 2025

ಯಾದಗಿರಿ ಅಲೆಮಾರಿ ಸಮುದಾಯಕ್ಕೆ ಸರ್ಕಾರದ ಯೋಜನೆಗಳ ಲಾಭ ದೊರೆಯಲಿ ಎಂದು – ಪಲ್ಲವಿ ಜಿ.ಅಧಿಕಾರಿಗಳಿಗೆ ಸೂಚನೆ!

ಯಾದಗಿರಿ ಅಲೆಮಾರಿ ಸಮುದಾಯಕ್ಕೆ ಸರ್ಕಾರದ ಯೋಜನೆಗಳ ಲಾಭ ದೊರೆಯಲಿ ಎಂದು – ಪಲ್ಲವಿ ಜಿ.ಅಧಿಕಾರಿಗಳಿಗೆ ಸೂಚನೆ!

ಯಾದಗಿರಿ, ಮಾ. 11: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯದ ಜನರು ಆರ್ಥಿಕವಾಗಿ ಸದೃಢಗೊಳ್ಳಲು ಹಾಗೂ ಸಮಾಜದ ಮುಖ್ಯವಾಹಿನಿಗೆ ಬರಲು ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಈ ಹಿನ್ನೆಲೆಯಲ್ಲಿ, ಅಧಿಕಾರಿಗಳು ಶ್ರದ್ದೆಯಿಂದ ಹಾಗೂ ಮಾತೃಹೃದಯದಿಂದ ಕಾರ್ಯನಿರ್ವಹಿಸಿ, ಅರ್ಹ ಫಲಾನುಭಾವಿಗಳಿಗೆ ಸೌಲಭ್ಯಗಳ ಲಾಭ ಖಚಿತಪಡಿಸಬೇಕು ಎಂದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಅವರು ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ವೃತ್ತಿ ಕೌಶಲ್ಯತೆ, ಶಿಕ್ಷಣ ಹಾಗೂ ಸ್ವಯಂ ಉದ್ಯೋಗ ನೇರಸಾಲ ಯೋಜನೆ ಮತ್ತು ಸ್ವಾವಲಂಬಿ ಯೋಜನೆಗಳಡಿ ಸರ್ಕಾರ ನೀಡುತ್ತಿರುವ ಆರ್ಥಿಕ ಬೆಂಬಲ ಸಮುದಾಯದ ಬಡಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಸಮುದಾಯದ ಮಕ್ಕಳಿಗೆ ಶಿಕ್ಷಣದ ಅವಕಾಶ

ವಸತಿ ಶಾಲೆಗಳಲ್ಲಿ ಈ ಸಮುದಾಯದ ಮಕ್ಕಳಿಗೆ ಯಾವುದೇ ಪ್ರವೇಶ ಪರೀಕ್ಷೆ ಇಲ್ಲದೆ ಪ್ರವೇಶಾವಕಾಶ ನೀಡುವಂತೆ ಸರ್ಕಾರ ಅವಕಾಶ ನೀಡಿದೆ. ಇದರಿಂದ ಗುಣಮಟ್ಟದ ಶಿಕ್ಷಣವನ್ನು ಪಡೆದು ಸ್ವಾವಲಂಬಿ ಜೀವನ ನಡೆಸಲು ಈ ಸಮುದಾಯದ ಮಕ್ಕಳಿಗೆ ನೆರವಾಗಬೇಕು. ಅಲ್ಲದೆ, ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅನುಷ್ಠಾನ ಸಮಿತಿ ಸಭೆಗಳನ್ನು ನಡೆಸಿ ಯೋಜನೆಗಳ ಲಾಭ ಫಲಾನುಭಾವಿಗಳಿಗೆ ತಲುಪುವಂತೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಅರ್ಜಿದಾರರ ದಾಖಲೆ ಸಮಸ್ಯೆಗೆ ಪರಿಹಾರ

ಈ ಸಮುದಾಯದ ಜನರು ತಮ್ಮ ಅರ್ಜಿಗಳನ್ನು ಸರಿಯಾಗಿ ಸಲ್ಲಿಸಲು ಸಾಕಷ್ಟು ದಾಖಲೆಗಳು ಲಭ್ಯವಿರುವಂತಾಗಬೇಕು. ಇಲ್ಲವಾದಲ್ಲಿ, ಅವರು ಕಾನೂನು ತೊಂದರೆಗಳಿಗೆ ಒಳಗಾಗುವ ಸಾಧ್ಯತೆ ಇದೆ. ಈ ಕಾರಣಕ್ಕಾಗಿ, ಅರ್ಹ ಫಲಾನುಭಾವಿಗಳ ಪಟ್ಟಿ ಸಿದ್ಧಪಡಿಸಿ, ಸರಿಯಾದ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅತ್ಯಾಚಾರ ಮತ್ತು ಅನುಮಾನಾಸ್ಪದ ಸಾವುಗಳ ಬಗ್ಗೆ ಕ್ರಮ

ಯಲಸತ್ತಿ ಗ್ರಾಮದಲ್ಲಿ ಮೇಲ್ವರ್ಗದ ಜನಾಂಗದಿಂದ ಈ ಸಮುದಾಯದ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚನೆ ಮಾಡಬೇಕೆಂದು ಅವರು ಒತ್ತಾಯಿಸಿದರು. ಗುರುಮಠಕಲ್ ತಾಲೂಕಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಇಬ್ಬರು ಚಿಂದಿ ಆಯುವ ಮಹಿಳೆಯರ ಪ್ರಕರಣದಲ್ಲಿ ನ್ಯಾಯಯುತ ಕ್ರಮ ಕೈಗೊಳ್ಳಲು ಪೊಲೀಸರು ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಉಪಸ್ಥಿತರು

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸುಸೀಲ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಆನಂದಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚನ್ನಬಸಪ್ಪ ಸೇರಿದಂತೆ ಸಮುದಾಯದವರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

 

Related Post

Leave a Reply

Your email address will not be published. Required fields are marked *

error: Content is protected !!