ಯಾದಗಿರಿ, ಡಿ 6:- ಯಾದಗಿರಿ ನಗರದಲ್ಲಿ ಇಂಜಿನಿಯರಿಂಗ್ ಕಾಲೇಜು ಮಂಜೂರು ಮಾಡುವ ಕುರಿತು ಬೆಳಗಾವಿ ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ಆಗ್ರಹಿಸಿ, ನಮ್ಮ ಕರ್ನಾಟಕ ಸೇನೆ ಜಿಲ್ಲಾ ಅಧ್ಯಕ್ಷ ವಿಶ್ವರಾಧ್ಯ ದಿಮ್ಮೆ ಅವರ ನೇತೃತ್ವದಲ್ಲಿ ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರ ರವರಿಗೆ ಮನವಿ ಸಲ್ಲಿಸಲಾಯಿತು.
ಮನವಿ ಸ್ವೀಕರಿಸಿದ ನಂತರ ಮಾತನಾಡಿದ ವಿಶ್ವರಾಧ್ಯ ದಿಮ್ಮೆ, “ಯಾದಗಿರಿ ಜಿಲ್ಲೆ ರೂಪುಗೊಂಡು 15 ವರ್ಷಗಳಾಗಿದ್ದರೂ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಇನ್ನೂ ಮಂಜೂರು ಆಗಿಲ್ಲ. ಇದರಿಂದ ಈ ಪ್ರದೇಶದ ಬಡ ಮತ್ತು ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳು ಉನ್ನತ ತಾಂತ್ರಿಕ ವಿದ್ಯಾಭ್ಯಾಸ ಪಡೆಯುವಲ್ಲಿ ದೊಡ್ಡ ಅಡಚಣೆಯನ್ನು ಎದುರಿಸುತ್ತಿದ್ದಾರೆ,” ಎಂದು ತಿಳಿಸಿದರು.
ಬಡ ವಿದ್ಯಾರ್ಥಿಗಳು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಅತಿಯಾದ ಶುಲ್ಕವನ್ನು ಭರಿಸುವಂತಿಲ್ಲದ ಕಾರಣ, ಅನೇಕ ವಿದ್ಯಾರ್ಥಿಗಳ ಕನಸುಗಳು ಕನಸಾಗಿಯೇ ಉಳಿಯುತ್ತಿವೆ. ರಾಜ್ಯದ ಅನೇಕ ಜಿಲ್ಲೆಗಳು ಹಾಗೂ ತಾಲೂಕು ಕೇಂದ್ರಗಳಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮಂಜೂರು ಆಗಿರುವುದನ್ನು ಉಲ್ಲೇಖಿಸಿದ ಅವರು, “ನಮ್ಮ ಜಿಲ್ಲೆಗೆ ಮಾತ್ರ ಸರ್ಕಾರಗಳು ಮಲತಾಯಿ ಧೋರಣೆ ತೋರಿಸುತ್ತಿರುವುದು ನ್ಯಾಯಸಂಗತವಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ತಿಂಗಳು ನಡೆಯಲಿರುವ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಶಾಸಕರು ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿ, ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮಂಜೂರಿಗಾಗಿ ಕ್ರಮ ಕೈಗೊಳ್ಳಬೇಕೆಂದು ವಿಶ್ವರಾಧ್ಯ ದಿಮ್ಮೆ ಒತ್ತಾಯಿಸಿದರು.
ಯಾದಗಿರಿ ಜಿಲ್ಲೆಯ ಯುವಕರು ತಾಂತ್ರಿಕ ಕ್ಷೇತ್ರದಲ್ಲಿ ಹಿಂದುಳಿಯದಂತೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ನೀಡಿದ ನಾಯಕರ ತಂಡದೊಂದಿಗೆ ಭೀಮು ಪೂಜಾರಿ, ಅಬ್ದುಲ್ ಅಜೀಜ್, ರಾಜು ಗುಂಡಗುರ್ತಿ, ವಿಶ್ವಜಿತ್ ಕಟ್ಟಿ, ಶರಣು, ಮಲ್ಲಿಕಾರ್ಜುನ್, ಚಂದ್ರಶೇಖರ್ ಮತ್ತು ಇನ್ನಿತರರು ಉಪಸ್ಥಿತರಿದ್ದರು.

