ಯಾದಗಿರಿ ಮೇ 20: ಕರ್ನಾಟಕ ಸರ್ಕಾರವು ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಸೂಚನೆ ಪ್ರಕಟಿಸಿದೆ.
ಈ ಹಿಂದೆ ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ಟಿ. ಪಾಂಡ್ವೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಯಾದಗಿರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಇದೇವೇಳೆ ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದ ಹರ್ಷಲ್ ನಾರಾಯಣರಾವ್ ಭೋಯರ್ ಅವರನ್ನು ಬೆಂಗಳೂರು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ (EDCS) ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
2016ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ರಾಹುಲ್ ಪಾಂಡ್ವೆ ಅವರು ಆಡಳಿತದಲ್ಲಿ ಸರಳತೆ, ಜನಸ್ನೇಹಿ ಕಾರ್ಯಶೈಲಿಯಿಂದ ಗುರುತಿಸಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಗೆ ಅವರ ನೇಮಕದಿಂದ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

